ಹನೂರು: ಪಟ್ಟಣದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 85ನೇ ಋಣ ಸಂದಾಯ ಕಣ್ಣಿನ ಉಚಿತ ತಪಾಸಣಾ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಹನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಓಬಿಸಿ ಮೋರ್ಚಾ, ಜನಧ್ವನಿ ವೆಂಕಟೇಶ್ ಅಭಿಮಾನಿ ಬಳಗ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ “85ನೇ ಋಣ ಸಂದಾಯ ಕಣ್ಣಿನ ತಪಾಸಣಾ ಶಿಬಿರಕ್ಕೆ ಸ್ಥಳೀಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಸಾರ್ವಜನಿಕರ ಆರೋಗ್ಯ ಕಾಳಜಿಯ ದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ, ಈ ಶಿಬಿರದಲ್ಲಿ ನೂರಾರು ಜನರು ಪಾಲ್ಗೊಂಡು ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ತಪಾಸಣೆಯ ನಂತರ ಅಗತ್ಯವಿದ್ದ ಫಲಾನುಭವಿಗಳಿಗೆ ಇದೇ ಸಂದರ್ಭದಲ್ಲಿ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.
ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯರ ತಂಡವು ಶಿಬಿರಾರ್ಥಿಗಳನ್ನು ಪರೀಕ್ಷಿಸಿ, ಕಣ್ಣಿನ ರಕ್ಷಣೆ ಮತ್ತು ಪೊರೆ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸಿದರು.
ಈ ವೇಳೆ ಬಿಜೆಪಿ ಮುಖಂಡರಾದ ಲೋಕೇಶ್ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬರಿಗೂ ಪಂಚೇಂದ್ರಿಯಗಳು ಅತ್ಯಂತ ಅಗತ್ಯವಾಗಿದೆ. ಅದರಲ್ಲಿ ಕಣ್ಣು ಅತ್ಯಂತ ಅಮೂಲ್ಯವಾಗಿದ್ದು, ಅದರ ಆರೋಗ್ಯದತ್ತಾ ಎಲ್ಲರೂ ಗಮನಹರಿಸಬೇಕಿದೆ. ಈ ನಿಟ್ಟಿನಲ್ಲಿ ಆಯೋಜಿಸಿರುವ ಬೇಸಿಗೆ ಶಿಬಿರ ಅತ್ಯಂತ ಸಹಕಾರಿಯಾಗಿದೆ ಎಂದರು.
ಈ ಸಂಧರ್ಭದಲ್ಲಿ ಅರವಿಂದ್ ರೆಡ್ಡಿ, ಹೊಂಡರಬಾಳು ರಾಜು, ಮಣಗಳ್ಳಿರಾಜು, ಅಭಿಮಾನಿ ಬಳಗದ ಸದಸ್ಯರು ಹಾಗೂ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.