ಸಮಯಕ್ಕೆ ಬಾರದ ಬಸ್, ಹೊಂಗನೂರಿನಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳ ಪರದಾಟ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ತಾಲೂಕಿನ ಹೊಂಗನೂರು ಗ್ರಾಮದಿಂದ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪ್ರತಿದಿನ ಸಾರಿಗೆ ಸಮಸ್ಯೆಯಿಂದ ತೀವ್ರ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಿಗ್ಗೆ ಶಾಲೆ ಮತ್ತು ಕಾಲೇಜು ಆರಂಭವಾಗುವ ಸಮಯದಲ್ಲಿ ಸಾಕಷ್ಟು ಸರ್ಕಾರಿ ಬಸ್‌ಗಳ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಒಂದೇ ಬಸ್‌ಗಾಗಿ ಗಂಟೆಗಳ ಕಾಲ ಕಾಯಬೇಕಾಗುತ್ತಿದೆ. ಬಸ್ ಬಂದರೂ ಅತಿಯಾದ ಜನಸಂದಣಿಯಿಂದ ವಿದ್ಯಾರ್ಥಿಗಳಿಗೆ ಬಸ್ ಏರುವುದು ಕಷ್ಟವಾಗುತ್ತಿದೆ. ಹಲವರು ಬಾಗಿಲಲ್ಲೇ ನಿಂತು ಅಪಾಯಕಾರಿಯಾಗಿ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಈ ಸಮಸ್ಯೆಯಿಂದ ವಿದ್ಯಾರ್ಥಿಗಳು ಶಾಲೆ ಹಾಗೂ ಕಾಲೇಜುಗಳಿಗೆ ತಡವಾಗಿ ತಲುಪುತ್ತಿದ್ದು, ಅವರ ವಿದ್ಯಾಭ್ಯಾಸಕ್ಕೂ ತೊಂದರೆ ಉಂಟಾಗುತ್ತಿದೆ. ಪಾಲಕರು ಸಹ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಹೊಂಗನೂರು ಗ್ರಾಮಕ್ಕೆ ಶಾಲಾ–ಕಾಲೇಜು ಸಮಯದಲ್ಲಿ ಹೆಚ್ಚುವರಿ ಬಸ್ ಗಳು ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳಿಗ್ಗೆ ಮತ್ತು ಸಂಜೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಿದರೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Share this Article
Leave a comment