ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ನಡೆದಿರುವ ಶಂಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸತ್ಯಶೋಧನಾ ತಂಡವನ್ನು ರಚಿಸಿದ್ದು, ಮಾಜಿ ಶಾಸಕ ಎನ್.ಮಹೇಶ್ ಅವರು ತಂಡದಲ್ಲಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಕಾರಣರಾದವರನ್ನು ಪತ್ತೆಹಚ್ಚುವ ಉದ್ದೇಶದಿಂದ ಬಿಜೆಪಿ ಮೂವರು ಹಿರಿಯ ನಾಯಕರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಮಾಜಿ ಸಚಿವ ಸಿ.ಟಿ. ರವಿ, ಮಾಜಿ ಶಾಸಕ ಎನ್.ಮಹೇಶ್ ಹಾಗೂ ಮಹೇಶ್ ಟೆಂಗಿನಕಾಯಿ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
ತಂಡವು ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಅಡ್ಡಮತದಾನದ ಹಿಂದಿನ ಸತ್ಯಾಂಶಗಳನ್ನು ಪರಿಶೀಲಿಸಲಿದೆ. ಜೂ.25 ರೊಳಗೆ ವರದಿ ಸಲ್ಲಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ. ಪರಿಷತ್ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ವಲಯದಲ್ಲಿ ಅಡ್ಡಮತದಾನದ ಬಗ್ಗೆ ಚರ್ಚೆಗಳು ಜೋರಾಗಿದ್ದು, ಸತ್ಯಶೋಧನಾ ತಂಡದ ವರದಿಯತ್ತ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಚಿತ್ತ ಹರಿಸಿದ್ದಾರೆ.